ಉತ್ತರ ಕನ್ನಡ: ಬಹು ಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

74 ವರ್ಷದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕಿಗೆ ಒಳಗಾದ ಹಿನ್ನೆಲೆಯಲ್ಲಿ ಆಗಸ್ಟ್ ನಲ್ಲಿ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಹಲವು ದಿನಗಳ ಚಿಕಿತ್ಸೆ ಬಳಿಕ ಸೆಪ್ಟೆಂಬರ್ 7 ರಂದು ಅವರ ಗಂಟಲು ದ್ರವ ತಪಾಸಣೆ ಮಾಡಿದಾಗ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಆದರೂ ಅವರಿಗೆ ವೆಂಟಿಲೇಟರ್ ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ 1.4ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು 1966ರಲ್ಲಿ ತೆಲಗು ಭಾಷೆಯ ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ ಎನ್ನುವ ಚಿತ್ರದ ಹಿನ್ನೆಲೆ ಗಾಯನದ ಮೂಲಕ ಪ್ರಸಿದ್ಧಿಯಾಗಿದ್ದರು. ಈವರೆಗೆ ಅವರು ಸುಮಾರು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ತೆಲಗು, ತಮಿಳು, ಮಳಿಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.