ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ  ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ನೀಡಿದೆ‌.

ಮಹತ್ವಾಕಾಂಕ್ಷೆಯ ಈ ಕಳಸಾ – ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ನೀಡಿದ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅಭಿನಂದಿಸಿದ್ದಾರೆ.

ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಚುರುಕು ಕೊಟ್ಟಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಆದೇಶ ಪ್ರತಿ ಓದಲು ಕ್ಲಿಕ್ ಮಾಡಿ